ಶುಕ್ರವಾರ, ಏಪ್ರಿಲ್ 17, 2026

ತರಿಮಲೆಯಲ್ಲಿ ವಿಜೃಂಭಣೆಯಿಂದ ನಡೆದ ಕಲಾವಳಿ ಉತ್ಸವ


ತರಿಮಲೆಯಲ್ಲಿ ವಿಜೃಂಭಣೆಯಿಂದ ನಡೆದ ಕಲಾವಳಿ ಉತ್ಸವ
ಕೊಟ್ಟಿಗೆಹಾರ:ತರುವೆ ಸಮೀಪದ ಆದಿಸ್ಥಾನ ತರಿಮಲೆಯಲ್ಲಿ ವಾರ್ಷಿಕ ಕಲಾವಳಿ ಉತ್ಸವ ವಿಜೃಂಭಣೆಯಿಂದ ನಡೆಯಿತು.

ಉತ್ಸವದ ಅಂಗವಾಗಿ ಆದಿಸ್ಥಾನವನ್ನು ತಳಿರು ತೋರಣ ಪುಷ್ಪಾಲಂಕಾರಗಳಿಂದ ಸಿಂಗರಿಸಲಾಗಿತ್ತು. ಭಕ್ತಾದಿಗಳು ಹಣ್ಣು ಕಾಯಿ ಹಾಗೂ ಹರಕೆಯನ್ನು ದೇವರಿಗೆ ಅರ್ಪಿಸಿ ದೇವರ ದರ್ಶನ ಪಡೆದರು. ೧೨ ಪ್ರಧಾನ ದೇವತೆಗಳಿಗೆ ಎಡೆ ಅರ್ಪಿಸಿ ೧೦೧ ದೈವಗಳಿಗೆ ಪಂಜಿನ ದೀಪವನ್ನು ಬೆಳಗಲಾಯಿತು. ಏಪ್ರಿಲ್ ೧೪ ರಿಂದ ಉತ್ಸವ ಪ್ರಾರಂಭವಾಗಿದ್ದು ಶ್ರೀಚೌಡೇಶ್ವರಿ ದೇವಸ್ಥಾನದಲ್ಲಿ ಕಲಾಹೋಮ, ಕಲಶ ಪೂಜೆ, ಪಟ್ಟದಾರಣೆ ಪೂಜೆ, ಕುಂಕುಮಾರ್ಚನೆ, ಹೂವಿನ ಪೂಜೆ, ನೈವೇದ್ಯ ಪೂಜೆ, ದೀಪಾರಾಧನೆ ಪೂಜೆ, ಮಹಾ ಮಂಗಳಾರತಿ, ಹಣ್ಣುಕಾಯಿ ಪ್ರಸಾದ ವಿನಿಯೋಗ ನಡೆಯಿತು. ತರುವೆ, ಕೊಟ್ಟಿಗೆಹಾರ, ಬೆಂಗಳೂರು, ಹಾಸನ, ಶಿವಮೊಗ್ಗ, ಬಳ್ಳಾರಿ, ಮೈಸೂರು ಸೇರಿದಂತೇ ವಿವಿದೆಡೆಯಿಂದ ನೂರಾರು ಭಕ್ತಾಧಿಗಳು ಆಗಮಿಸಿದ್ದರು. ಪೂಜಾ ವಿಧಿವಿಧಾನಗಳು ವಿಜೃಂಭಣೆಯಿಂದ ಶಾಸ್ತ್ರೋಕ್ತವಾಗಿ ನಡೆಯಿತು. ಭಕ್ತಾಧಿಗಳಿಗೆ ಅನ್ನ ಸಂತರ್ಪಣೆ ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನ ಸಮಿತಿ ಅಧ್ಯಕ್ಷರಾದ ಟಿ.ಎಂ ರಾಮಚಂದ್ರಗೌಡ ಹಾಗೂ ಪದಾಧಿಕಾರಿಗಳು ಇದ್ದರು.

ಬುಧವಾರ, ಏಪ್ರಿಲ್ 8, 2026

ಕನ್ನಡದ ಸಂಯೋಜಕ ಪ್ರತಿಭೆ ತೇಜಸ್ವಿ


ಕೊಟ್ಟಿಗೆಹಾರ:ಪೋಟೋಗ್ರಾಫಿ, ಫಿಶಿಂಗ್, ಪೈಂಟಿಂಗ್, ಸಾಹಿತ್ಯ ಹೀಗೆ ನಾನಾ ಬಗೆಯ ಆಸಕ್ತಿ ಕುತೂಹಲಗಳಿದ್ದ ತೇಜಸ್ವಿ ಅವರು ಕನ್ನಡದ ಸಂಯೋಜಕ ಪ್ರತಿಭೆ ಎಂದು ವಿಮರ್ಶಕ, ಲೇಖಕ ಡಾ.ಎಚ್.ಎಸ್.ಸತ್ಯನಾರಾಯಣ ಹೇಳಿದರು.
ಕೊಟ್ಟಿಗೆಹಾರದ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದಲ್ಲಿ ನಡೆದ ಮೂರು ದಿನದ ಛಾಯಾಗ್ರಹಣ ಕಾರ್ಯಾಗಾರದಲ್ಲಿ ತೇಜಸ್ವಿಯವರ ಕ್ಯಾಮರಾ ಕಣ್ಣು ವಿಷಯದ ಕುರಿತು ಉಪನ್ಯಾಸ ನೀಡಿ ಮಾತನಾಡಿದರು.

ಒಂದು ಸನ್ನಿವೇಶದ ಅರ್ಥಪೂರ್ಣತೆಗೆ ಅಗತ್ಯವಾದ ವಿಶಿಷ್ಟ ವಿವರಗಳನ್ನು ಗ್ರಹಿಸೋದನ್ನು ಪೋಟೋಗ್ರಫಿ ಹೇಳಿಕೊಡುತ್ತದೆ. ವಿಸ್ತಾರವಾದ ಅಸ್ತವ್ಯಸ್ತವಾದ ಜಗತ್ತನ್ನು ಒಂದು ಚೌಕಟ್ಟಿನೊಳಗೆ ನೋಡುವುದನ್ನು ಪೋಟೋಗ್ರಫಿ ಕಲಿಸುತ್ತದೆ. ವಾಸ್ತವ ಜಗತ್ತಿನ ಸರ್ವೇಸಾಧಾರಣ ದೃಶ್ಯ ಚೌಕಟ್ಟಿನೊಳಗೆ ನೋಡಿದಾಗ ವಿಶಿಷ್ಠವಾಗಿ ಕಾಣುತ್ತದೆ ಎಂಬುದು ಛಾಯಾಗ್ರಾಹಣದ ಕುರಿತ ತೇಜಸ್ವಿ ಅವರ ಮಾತು ಎಂದರು.

ತೇಜಸ್ವಿ ಪ್ರತಿಷ್ಠಾನದ ಅಧ್ಯಕ್ಷರಾದ ಡಾ.ಪ್ರದೀಪ್ ಕೆಂಜಿಗೆ ಮಾತನಾಡಿ, ತೇಜಸ್ವಿ ಪ್ರತಿಷ್ಠಾನದಲ್ಲಿ ತೇಜಸ್ವಿ ಅವರ ಆಸಕ್ತಿಯ ವಿಷಯಗಳ ಕುರಿತು ಕುತೂಹಲ ಆಸಕ್ತಿ ಮೂಡಿಸುವ ವಾತಾವರಣವನ್ನು ನಿರ್ಮಿಸುವತ್ತ ಹೆಚ್ಚು ಆದ್ಯತೆ ನೀಡಲಾಗಿದೆ ಎಂದರು.

ತೇಜಸ್ವಿ ಪ್ರತಿಷ್ಠಾನದ ಸದಸ್ಯ ಕಾರ್ಯದರ್ಶಿಗಳು ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ.ಸಿ ರಮೇಶ್ ಮಾತನಾಡಿ, ಪೋಟೋಗ್ರಫಿ ಕಾರ್ಯಾಗಾರವು ಛಾಯಾಗ್ರಹಣದಲ್ಲಿ ಆಸಕ್ತಿರುವವರಿಗೆ ಉಪಯುಕ್ತವಾಗಿದೆ. ಕ್ಯಾಮರಾ ಬಳಸುವ ಬಗೆ, ತಾಂತ್ರಿಕ ವಿವರಗಳು ಮುಂತಾದವುಗಳನ್ನು ತಿಳಿದುಕೊಳ್ಳಲು ಈ ಕಾರ್ಯಾಗಾರ ಉಪಯುಕ್ತವಾಗಿದೆ ಎಂದರು.

ತೇಜಸ್ವಿ ಒಡನಾಡಿ ಮತ್ತು ಕಲಾವಿದ ಬಾಪುದಿನೇಶ್ ಮಾತನಾಡಿ ತೇಜಸ್ವಿ ಅವರ ಪೋಟೊಗ್ರಫಿ ಹವ್ಯಾಸ ಪ್ರತಿಯೊಂದನ್ನು ಹೊಸ ದೃಷ್ಟಿಕೋನದಿಂದ ನೋಡುವುದನ್ನು ಕಲಿಸಿದೆ. ಅವರ ದೃಷ್ಟಿಕೋನ ಅವರ ಬರಹಗಳನ್ನು ಪ್ರಭಾವಿಸಿದೆ ಎಂದರು. ಛಾಯಾಗ್ರಾಹಕ ಶಿವಕುಮಾರ್ ಹಿರೇಗೌಜ ಮಾತನಾಡಿ ತೇಜಸ್ವಿ ಪ್ರತಿಷ್ಠಾನದಲ್ಲಿ ತೇಜಸ್ವಿ ಅವರ ಆಸಕ್ತಿಗೆ ಸಂಬಂದಿಸಿದ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದು ಶ್ಲಾಘನೀಯ ಎಂದರು.

 ಸಂಪನ್ಮೂಲ ವ್ಯಕ್ತಿಗಳಾದ ಛಾಯಾಗ್ರಾಹಕರಾದ ಬೆಂಗಳೂರಿನ ಆನಂದ್‌ಕುಮಾರ್ ಮಾತನಾಡಿ, ತೇಜಸ್ವಿಯವರು ಪೋಟೋಗ್ರಫಿಯನ್ನು ಕೇವಲ ತಾಂತ್ರಿಕ ಕೌಶಲ್ಯವಾಗಿ ಅಲ್ಲ, ಬದುಕಿನೊಂದಿಗೆ ಪ್ರಕೃತಿಯೊಂದಿಗೆ ಸಂವಾದವಾಗಿ ನೋಡುತ್ತಿದ್ದರು.ಕಾರ್ಯಾಗಾರದ ಪ್ರತಿ ಅಧ್ಯಾಯವೂ ತಾತ್ವಿಕ ಚರ್ಚೆಯಿಂದ ಹಿಡಿದು ಪ್ರಾಯೋಗಿಕ ಚಿತ್ರಣದವರೆಗೆ ತೇಜಸ್ವಿಯವರ ಚಿಂತನೆಯನ್ನು ಪ್ರತಿನಿಧಿಸುತ್ತಿತ್ತು ಎಂದರು.

 ಹೊಸಪೇಟೆಯ ಪಂಪಯ್ಯ ಮಳೇಮಠ ಮಾತನಾಡಿ, ಪಕ್ಷಿ ವೀಕ್ಷಣೆ ಮತ್ತು  ಛಾಯಾಗ್ರಹಣಕ್ಕೆ ತಾಳ್ಮೆ ಮತ್ತು ಮೌನದಿಂದ ಇರಬೇಕಾಗುತ್ತದೆ. ಕ್ಯಾಮರಾದಲ್ಲಿ ಪಕ್ಷಿಗಳ ಪೋಟೋ ತೆಗೆಯುತ್ತಾ ಅವುಗಳ ಅದ್ಬುತ ಜಗತ್ತು ನಮ್ಮ ಮುಂದೆ ತೆರೆದುಕೊಳ್ಳುತ್ತದೆ ಎಂದರು. 

ಕ ಬೆಂಗಳೂರು, ಮೈಸೂರು, ಗದಗ, ತುಮಕೂರು, ಹುಬ್ಬಳ್ಳಿ ಮುಂತಾದ ಜಿಲ್ಲೆಗಳಿಂದ ಆಗಮಿಸಿದ್ದ 25 ಶಿಬಿರಾರ್ಥಿಗಳು ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು. ಮೂರು ದಿನಗಳ ಕಾಲ ನಡೆದ ಕಾರ್ಯಾಗಾರದಲ್ಲಿ ಬೇಸಿಕ್ ಪೋಟೋಗ್ರಫಿ, ಲ್ಯಾಂಡ್‌ಸ್ಕೇಪ್ ಛಾಯಾಗ್ರಹಣ, ಕ್ಯಾಮರಾ ಬಳಕೆ ಸಂಯೋಜನೆ, ಪೋಟೋ ಎಡಿಟಿಂಗ್ ಕುರಿತು ತಿಳಿಸಿಕೊಡಲಾಯಿತು.

 ಸಂತೆಯ ಚಿತ್ರಣ, ಗ್ರಾಮೀಣ ಜೀವನದ ಛಾಯಾಗ್ರಹಣ, ಪ್ರಕೃತಿ ನಡಿಗೆ ನಡೆಯಿತು.
ಈ ಸಂದರ್ಭದಲ್ಲಿ ತೇಜಸ್ವಿ ಪ್ರತಿಷ್ಠಾನದ ತಾಂತ್ರಿಕ ಸಹಾಯಕ ಪ್ರಜ್ವಲ್, ಕೀಟ ತಜ್ಞ ಡಾ.ಅವಿನಾಶ್, ಲೇಖಕ ಪೂರ್ಣೇಶ್ ಮತ್ತಾವರ, ತೇಜಸ್ವಿ ಪ್ರತಿಷ್ಠಾನದ ಸಂಯೋಜಕ ನಂದೀಶ್ ಬಂಕೇನಹಳ್ಳಿ, ಸತೀಶ್ ತರುವೆ, ಸಂಗೀತಾ ತರುವೆ, ಸುದಿತ್, ಪೂರ್ಣೇಶ್ ಮುಂತಾದವರು ಇದ್ದರು.

ಗುರುವಾರ, ಮಾರ್ಚ್ 26, 2026

ಡಾ.ಪ್ರದೀಪ್ ಕೆಂಜಿಗೆ ಅವರ ಕೃತಿಗೆ ಕನ್ನಡ ಸಾಹಿತ್ಯ ಅಕಾಡೆಮಿ ಅತ್ಯುತ್ತಮ ಪುಸ್ತಕ ಪ್ರಶಸ್ತಿ


ಕೊಟ್ಟಿಗೆಹಾರ:ಲೇಖಕರಾದ ಡಾ.ಪ್ರದೀಪ್ ಕೆಂಜಿಗೆ ಅವರ ನರವಾನರ ಕೃತಿಗೆ ಕನ್ನಡ ಸಾಹಿತ್ಯ ಅಕಾಡೆಮಿಯಿಂದ ಕೊಡಮಾಡುವ ಅತ್ಯುತ್ತಮ ಪುಸ್ತಕ ಪ್ರಶಸ್ತಿ ದೊರೆತಿದೆ.
2024ರಲ್ಲಿ ಪ್ರಕಟವಾದ ವಿವಿಧ 17 ಸಾಹಿತ್ಯ ಪ್ರಕಾರದ ಕೃತಿಗಳಿಗೆ ವಿಮರ್ಶಕರ ಅಭಿಪ್ರಾಯಗಳನ್ನು ಆಧರಿಸಿ ಅತ್ಯುತ್ತಮ ಕೃತಿಗಳೆಂದು ಪರಿಗಣಿಸಿ ಆಯ್ಕೆ ಮಾಡಲಾಗಿದ್ದು ಸಂಕೀರ್ಣ ಪ್ರಕಾರದಲ್ಲಿ ಡಾ.ಪ್ರದೀಪ್ ಕೆಂಜಿಗೆ ಅವರ ನರವಾನರ ಕೃತಿಗೆ ಅತ್ಯುತ್ತಮ ಪುಸ್ತಕ ಪ್ರಶಸ್ತಿ ದೊರೆತಿದೆ. ಪ್ರಶಸ್ತಿ 25 ಸಾವಿರ ನಗದು ಬಹುಮಾನ, ಫಲಕ ಪ್ರಮಾಣ ಪತ್ರವನ್ನು ಒಳಗೊಂಡಿದೆ.
ನರವಾನರ ಕೃತಿ ಚಿಂಪಾAಜಿಗಳ ನಡವಳಿಕೆ, ಜೀವನವಿಧಾನ ಮುಂತಾದವುಗಳನ್ನು ವಿಶ್ಲೇಷಿಸುವ ವೈಜ್ಞಾನಿಕ ಕೃತಿಯಾಗಿದ್ದು ಜೀವ ವಿಜ್ಞಾನದ ಸಂಶೋಧನೆಗಳನ್ನು, ಹಲವಾರು ವಿಸ್ಮಯಕಾರಿ ಸಂಗತಿಗಳನ್ನು ಮನಮುಟ್ಟುವಂತೇ ಈ ಕೃತಿಯಲ್ಲಿ ಕಟ್ಟಿಕೊಟ್ಟಿದ್ದಾರೆ.
 ಡಾ.ಪ್ರದೀಪ್ ಕೆಂಜಿಗೆ ಅವರು ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರೊಡನೆ ಪ್ಯಾಪಿಲಾನ್ 1. 2, ವಿಸ್ಮಯ 1 2 3 ಕೃತಿಗಳನ್ನು ರಚಿಸಿದ್ದು ಪ್ಯಾಪಿಯೋನ್ 3, ಬರ್ಮುಡಾ ಟ್ರೆöÊಂಗಲ್, ಅದ್ಭುತಯಾನ, ಹೆಬ್ಬಾವಿನೊಡನೆ ಹೋರಾಟ ಕೃತಿಯನ್ನು ಸಹ ಪ್ರಕಟಿಸಿದ್ದಾರೆ. ಪಶ್ಚಿಮ ಘಟ್ಟಗಳ ಜೀವ ವೈವಿಧ್ಯತೆ ಹಾಗೂ ಅದರ ಮೇಲೆ ಕ್ರಿಮಿನಾಶಕಗಳ ದುಷ್ಪರಿಣಾಮಗಳ ಅಧ್ಯಯನದಲ್ಲಿ ಪಿಎಚ್‌ಡಿ ಪಡೆದಿದ್ದಾರೆ. ಕೆಫೆ ಕಾಫಿ ಡೇಯಲ್ಲಿ ಸಂಶೋಧನಾ ಮತ್ತು ಅಭಿವೃದ್ದಿ ವಿಭಾಗದ ಮುಖ್ಯ ವಿಜ್ಞಾನಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಪ್ರಸ್ತುತ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ಅಧ್ಯಕ್ಷರಾಗಿದ್ದಾರೆ.

ಗುರುವಾರ, ಮಾರ್ಚ್ 12, 2026

ರಂಗ ಪ್ರಯೋಗ ಕಲಾವಿದರಿಂದ ಅರ್ಜಿ ಆಹ್ವಾನ

ಚಿಕ್ಕಮಗಳೂರು:ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ರಾಜ್ಯಾದ್ಯಂತ ಪ್ರದರ್ಶಿಸಲು ಉದ್ದೇಶಿಸಿರುವ ವಚನ ಕಲ್ಯಾಣ ರಂಗ ಪ್ರಯೋಗಕ್ಕೆ ರಂಗ ಕಲಾವಿದರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಚಿಕ್ಕಮಗಳೂರಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ.ಸಿ ರಮೇಶ್ ತಿಳಿಸಿದ್ದಾರೆ.
ಈ ಬಗ್ಗೆ ಹೇಳಿಕೆ ನೀಡಿರುವ ಅವರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ೯ ಗಂಟೆಗಳ ವಚನ ಕಲ್ಯಾಣ ಎಂಬ ಅಹೋರಾತ್ರಿ  ನಾಟಕ ಸಿದ್ದಪಡಿಸಿ ನಾಡಿನಾದ್ಯಂತ ಪ್ರದರ್ಶಿಸಲು ಉದ್ದೇಶಿಸಲಾಗಿದ್ದು ಆಸಕ್ತ ಯುವಕ, ಯುವತಿಯರು ಹಾಗೂ ಅನುಭವಿ ರಂಗ ಕಲಾವಿದರು ಮತ್ತು ಗಾಯಕರಿಂದ ಅರ್ಜಿ ಆಹ್ವಾನಿಸಲಾಗಿದೆ. ೧೮ ರಿಂದ ೪೦ ವರ್ಷದೊಳಗಿನ ರಂಗಶಿಕ್ಷಣದಲ್ಲಿ ತರಬೇತಿ ಪಡೆದ ಹಾಗೂ ನಾಟಕಗಳಲ್ಲಿ ಅಭಿನಯಿಸಿದ ಕಲಾವಿದರಿಗೆ ಆದ್ಯತೆ ನೀಡಲಾಗುವುದು. ಭರ್ತಿ ಮಾಡಿದ ಅರ್ಜಿಗಳನ್ನು ಮಾ.೨೦ರೊಳಗೆ ಸದಸ್ಯ ಕಾರ್ಯದರ್ಶಿ, ಸಂತ ಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರ, ಕಲಾಗ್ರಾಮ, ಮಲ್ಲತ್ತಹಳ್ಳಿ ಬೆಂಗಳೂರು-೫೬೦೦೫೬ ಇಲ್ಲಿಗೆ ಸಲ್ಲಿಸಬಹುದು ಎಂದು ತಿಳಿಸಿದ್ದಾರೆ.

ಭಾನುವಾರ, ಜನವರಿ 4, 2026

ಎರಡು ದಶಕದ ನಂತರ ಒಂದಾದ ಸಹಪಾಠಿಗಳು, ಪ್ರಾರ್ಥನೆ, ಹಾಜರಾತಿ,ಪಾಠ: ಮತ್ತೆ ಮರುಕಳಿಸಿದ ಶಾಲಾ ದಿನಗಳು: ಅಪೂರ್ವ ಕ್ಷಣಕ್ಕೆ ಸಾಕ್ಷಿಯಾದ ಸ್ನೇಹಸಮ್ಮೀಲನ

 ಬಣಕಲ್:ಇಪ್ಪತ್ತು ವರ್ಷದ ಹಿಂದೆ ಬಣಕಲ್ ಪ್ರೌಢಶಾಲೆಯಲ್ಲಿ ಕಲಿತ ವಿದ್ಯಾರ್ಥಿಗಳು ಮತ್ತೆ ಅದೇ ಶಾಲೆಯ ಕೊಠಡಿಯಲ್ಲಿ ಕುಳಿತಿದ್ದರು. 
ಅಂದು ಪಾಠ ಮಾಡಿದ ಶಿಕ್ಷಕರು ಬಂದು ಶಾಲೆಯ ಇದೇ ವಿದ್ಯಾರ್ಥಿಗಳ ಹಾಜರಾತಿ ಪುಸ್ತಕದ ತೆಗೆದು ಹಾಜರಾತಿ ತೆಗೆದುಕೊಂಡು ವಿದ್ಯಾರ್ಥಿಗಳಿಗೆ ಪಾಠ ಮಾಡಿದರು.
 ಪ್ರಶ್ನೆಗಳನ್ನು ಕೇಳಿ ವಿದ್ಯಾರ್ಥಿಗಳಿಂದ ಉತ್ತರ ಪಡೆದುಕೊಂಡರು. ಎರಡು ದಶಕದ ಹಿಂದಿನ ಶಾಲೆಯ ನೆನಪನ್ನು ಮತ್ತೆ ಮೆಲುಕು ಹಾಕಿದರು. ಪ್ರಾರ್ಥನೆಗೆ ಸಾಲಾಗಿ ನಿಂತು ನಾಡಗೀತೆಗೆ ಧ್ವನಿಯಾದರು.
ಬಣಕಲ್ ಪ್ರೌಢಶಾಲೆಯ ೨೦೦೬-೨೦೦೮ರ ಬ್ಯಾಚ್‌ನ ವಿದ್ಯಾರ್ಥಿಗಳ ಸ್ನೇಹ ಸಮ್ಮೀಲನ ಮತ್ತು ಗುರು ವಂದನಾ ಕಾರ್ಯಕ್ರಮ ಇಂತಹ ಅಪೂರ್ವ ಸನ್ನಿವೇಶಕ್ಕೆ ಸಾಕ್ಷಿಯಾಯಿತು.
 ೪೦ ಕ್ಕೂ ಹೆಚ್ಚು ಹಳೆಯ ವಿದ್ಯಾರ್ಥಿಗಳು ಒಂದೆಡೆ ಸೇರಿ ನೆನಪನ್ನು ಮೆಲುಕು ಹಾಕಿದರು. ಶಿಕ್ಷಕರಾದ ಎನ್ ಚಂದ್ರಶೇಖರ್, ಪಿ ವಾಸುದೇವ್, ಜಿ.ಎಚ್ ಶ್ರೀನಿವಾಸ್, ವಲ್ಸಮ್ಮ, ಕವಿತಾ, ಸಿ ಬೋರಕ್ಕ, ಡಿ.ಎನ್ ಪ್ರವೀಣ್, ಉಮಾ ಮಹೇಶ್ ಅವರನ್ನು ಗೌರವಿಸಲಾಯಿತು.
 ಬೇರೆ ಬೇರೆ ಊರುಗಳಿಂದ ಬಂದ ವಿದ್ಯಾರ್ಥಿಗಳು ಎರಡು ದಶಕಗಳ ನಂತರ ಸಿಕ್ಕ ತಮ್ಮ ಸಹಪಾಠಿಗಳನ್ನು ಕಂಡು ಕುಶಲೋಪರಿ ವಿಚಾರಿಸಿದರು. ಶಾಲಾ ದಿನಗಳನ್ನು ನೆನಪಿಸಿಕೊಂಡರು. ನೌಕರಿ, ಮದುವೆ, ಮಕ್ಕಳು ಮುಂತಾದವುಗಳ ಬಗ್ಗೆ ಪರಿಚಯ ಮಾಡಿಕೊಂಡರು. ಬದುಕಿನ ಜಂಜಾಟಗಳಲ್ಲಿ ಮುಳುಗಿ ಹೋಗಿದ್ದ ವಿದ್ಯಾರ್ಥಿಗಳು ಮತ್ತೆ ಶಾಲೆಯ ಚಂದದ ದಿನಗಳನ್ನು ಕಳೆದ ಶಾಲೆಯಲ್ಲಿ ಮತ್ತೆ ಸೇರಿ ಸಂತೋಷಪಟ್ಟರು.

 ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾಧ್ಯವಾಗದ ವಿದೇಶದಲ್ಲಿ ನೌಕರಿಯಲ್ಲಿರುವ ಹಳೆಯ ವಿದ್ಯಾರ್ಥಿಗಳು ಗೂಗಲ್ ಮೀಟ್ ಮೂಲಕ ಕಾರ್ಯಕ್ರಮವನ್ನು ಕಣ್ತುಂಬಿಕೊಂಡರು.
ಶಾಲೆಯ ಆವರಣದಲ್ಲಿ ತೆಂಗಿನ ಸಸಿಗಳನ್ನು ನೆಡಲಾಯಿತು. 
Water dispenser ನ್ನು ಶಾಲೆಗೆ ಕೊಡುಗೆಯಾಗಿ ನೀಡಲಾಯಿತು..
 ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಬಿ.ಎಲ್. ದಿವಾಕರ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದರು. ಈ ಸಂದರ್ಭದಲ್ಲಿ ಕೋಶಾಧಿಕಾರಿ ಬಿ.ಕೆ.ಪೃಥ್ವಿ, ನಿರ್ದೇಶಕರಾದ ಜಕವುಲ್ಲಾ, ಬಿ.ಎಸ್.ವಿಕ್ರಂ ೨೦೦೬-೨೦೦೮ರ ಬ್ಯಾಚ್‌ನ ವಿದ್ಯಾರ್ಥಿಗಳು ಮುಂತಾದವರು ಇದ್ದರು. 

ಸೋಮವಾರ, ಡಿಸೆಂಬರ್ 1, 2025

ತೇಜಸ್ವಿ ಪ್ರತಿಷ್ಠಾನದಲ್ಲಿ ಚಿಟ್ಟೆ ಉದ್ಯಾನವನ ವೀಕ್ಷಣೆಗೆ ಮುಕ್ತ


ಕೊಟ್ಟಿಗೆಹಾರ;ಕೊಟ್ಟಿಗೆಹಾರದ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದಲ್ಲಿ ಚಿಟ್ಟೆ ಉದ್ಯಾನವನ ವೀಕ್ಷಣೆಗೆ ಮುಕ್ತವಾಗಿದ್ದು ಚಿಟ್ಟೆಗಳಿಗೆ ಪೂರಕವಾದ ವಾತಾವರಣ ನಿರ್ಮಾಣವಾಗಿದೆ ಎಂದು ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ಅಧ್ಯಕ್ಷ ಡಾ.ಪ್ರದೀಪ್ ಕೆಂಜಿಗೆ ಹೇಳಿದರು.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ವತಿಯಿಂದ ಕೊಟ್ಟಿಗೆಹಾರದಲ್ಲಿ ನಡೆದ ಡಿಜಿಟಲ್ ಕನ್ನಡ ಫಾಂಟ್ ಕಾರ್ಯಾಗಾರ ಮತ್ತು ಕನ್ನಡ ಕೈಬರಹ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಚಿಟ್ಟೆ ಉದ್ಯಾನವನದಲ್ಲಿ ಚಿಟ್ಟೆಗಳಿಗೆ ಸಂಬಂಧಿಸಿದ ಅತಿಥೇಯ ಸಸ್ಯಗಳನ್ನು ನೆಡಲಾಗಿದ್ದು ಮಡ್ ಪಡ್ಲಿಂಗ್ ಮತ್ತು ಆಹಾರ ಪೂರಕಗಳನ್ನು ಮಾಡಲಾಗಿದೆ. ಚಿಟ್ಟೆಗಳ ಕುರಿತಾದ ಮಾಹಿತಿ ಫಲಕಗಳನ್ನು ಉದ್ಯಾನವನದಲ್ಲಿ ಹಾಕಲಾಗಿದ್ದು ಚಿಟ್ಟೆಗಳ ಜಗತ್ತಿನ ವಿವರಗಳು ಜ್ಞಾನಾಸಕ್ತರಿಗೆ ಸಿಗಲಿದೆ. ಆರ್ಕಿಡ್‌ಗಳ ಮಹತ್ವ ಮತ್ತು ಸಂರಕ್ಷಣೆಯ ಅರಿವು ಮೂಡಿಸುವ ಆರ್ಕಿಡ್ ಲೋಕ ಪ್ರಮುಖ ಆಕರ್ಷಣೆಯಾಗಿದೆ. ರಂಗಮಂದಿರ ಮತ್ತು ವಸತಿಗೃಹದ ಕಾಮಗಾರಿ ಶೀಘ್ರದಲ್ಲಿ ಪೂರ್ಣಗೊಳ್ಳಲಿದ್ದು ಕಾರ್ಯಾಗಾರ, ನಾಟಕ ಮುಂತಾದ ಚಟುವಟಿಕೆಗಳು ನಿರಂತರವಾಗಿ ನಡೆಯಲಿದೆ ಎಂದರು.
ತೇಜಸ್ವಿ ಪ್ರತಿಷ್ಠಾನದ ಸದಸ್ಯರಾದ ರವೀಶ್ ಬಸಪ್ಪ ಮಾತನಾಡಿ, ಕುತೂಹಲ, ಜೀವನ ಪ್ರೀತಿ, ಜೀವನೋತ್ಸಾಹವನ್ನು ಮಕ್ಕಳು ಬೆಳಸಿಕೊಳ್ಳಬೇಕು. ಬಹುಮುಖ ವ್ಯಕ್ತಿತ್ವದ ತೇಜಸ್ವಿ ಅವರ ಕೃತಿಗಳನ್ನು ಮಕ್ಕಳು ಓದಬೇಕು ಎಂದರು.
ತೇಜಸ್ವಿ ಪ್ರತಿಷ್ಠಾನದ ಸದಸ್ಯರಾದ ದೀಪಾ ಹಿರೇಗುತ್ತಿ ಮಾತನಾಡಿ, ತೇಜಸ್ವಿ ಅವರ ಮಿಲೇನಿಯಂ ಸರಣಿಯ ಪುಸ್ತಕಗಳು ಮಕ್ಕಳಲ್ಲಿ ಓದಿನ ಅಭಿರುಚಿಯನ್ನು ಬೆಳೆಸುತ್ತವೆ. ತೇಜಸ್ವಿ ಪ್ರತಿಷ್ಠಾನ ಬಹುಮುಖ ವ್ಯಕ್ತಿತ್ವದ ತೇಜಸ್ವಿ ಅವರ ಆಶಯಗಳನ್ನು ತಮ್ಮ ಕಾರ್ಯ ಚಟುವಟಿಕೆಗಳ ಮೂಲಕ ಸಕ್ರಿಯವಾಗಿಟ್ಟಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ.ಸಿ.ರಮೇಶ್ ಮಾತನಾಡಿ, ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಕನ್ನಡ ಭಾಷೆಯನ್ನು ಬಲಿಷ್ಠವಾಗಿ ಬೆಳೆಸಲು ಸಾಧ್ಯವಾದರೇ ಮಾತ್ರ ಕನ್ನಡ ಭಾಷೆ ಉಳಿಯುತ್ತದೆ ಎಂಬುದು ತೇಜಸ್ವಿ ಅವರ ಅಭಿಪ್ರಾಯವಾಗಿತ್ತು. ಕನ್ನಡ ಭಾಷೆಯನ್ನು ತಂತ್ರಜ್ಞಾನಸ್ನೇಹಿ ಭಾಷೆಯಾಗಿಸಲು ಡಿಜಿಟಲ್ ಕನ್ನಡ ಫಾಂಟ್ ಕಾರ್ಯಾಗಾರದಂತಹ  ಕಾರ್ಯಕ್ರಮಗಳು  ಸಹಾಯಕ ಎಂದರು.
ಡಿಜಿಟಲ್  ಕನ್ನಡ ಫಾಂಟ್ ವಿನ್ಯಾಸಕಾರರಾದ ಮಂಜುನಾಥ್ ಆರ್, ಡಿಜಿಟಲ್ ಕನ್ನಡ ಫಾಂಟ್ ಕುರಿತು ಮಾಹಿತಿ ನೀಡಿದರು. ತೇಜಸ್ವಿ ಪ್ರತಿಷ್ಠಾನದ ಸದಸ್ಯ ರವೀಶ್ ಬಸಪ್ಪ ಅವರು, ೨೦೨೬ನೇ ಸಾಲಿನ ಕ್ಯಾಲೆಂಡರ್‌ನ ವಿನ್ಯಾಸ ಬಿಡುಗಡೆ ಮಾಡಿದರು. ಸದಸ್ಯರಾದ ದೀಪಾ ಹಿರೇಗುತ್ತಿ ಅವರು ಆರ್ಕಿಡ್ ಮಾಹಿತಿ ಫಲಕಗಳನ್ನು ಉದ್ಘಾಟನೆ ಮಾಡಿದರು. ತೇಜಸ್ವಿ ಪ್ರತಿಷ್ಠಾನದ ಆವರಣದಲ್ಲಿ ಕಂಡು ಬರುವ ಅಪರೂಪದ  ಚಿಟ್ಟೆಗಳ ಪರಿಚಯ ಫಲಕಗಳು ಮತ್ತು ಚಿಟ್ಟೆ ಉದ್ಯಾನ ಸಂಬಂಧಿಸಿದ ಮಾಹಿತಿ ಫಲಕವನ್ನು ಕಲಾವಿದರಾದ ಸುರೇಶ್ ಚಂದ್ರ ದತ್ತ ನೆರವೇರಿಸಿದರು. ಕೈ ಬರಹ ಸ್ಪರ್ಧೆಯಲ್ಲಿ ವಿಜೇತರಾದ ಸ್ಪರ್ಧಿಗಳಿಗೆ ಬಹುಮಾನ ವಿತರಿಸಲಾಯಿತು.
ಈ ಸಂದರ್ಭದಲ್ಲಿ ವಿಜ್ಞಾನಿಗಳಾದ ಡಾ.ಸುಚಿತ್ರಕುಮಾರಿ, ಕೀಟ ತಜ್ಞ ಡಾ.ಅವಿನಾಶ್, ತೇಜಸ್ವಿ ಪ್ರತಿಷ್ಠಾನದ ತಾಂತ್ರಿಕ ಸಂಯೋಜಕ ಪ್ರಜ್ವಲ್, ಸಂಯೋಜಕ ನಂದೀಶ್ ಬಂಕೇನಹಳ್ಳಿ, ಸಿಬ್ಬಂದಿ ಸತೀಶ್ ತರುವೆ, ಪೂರ್ಣೇಶ್, ಸಂಗೀತಾ, ಸಿದ್ದಿಕ್, ಕಲಾವಿದರಾದ ಬಾಪು ದಿನೇಶ್, ಟಿ.ಡಿ ಸುರೇಶ್, ಸಾಮಾಜಿಕ ಕಾರ್ಯಕರ್ತ ಸಂಜಯಗೌಡ, ರೈತ ಮುಖಂಡ ಗುರುಶಾಂತಪ್ಪ, ವಿವಿಧ ಶಾಲೆಗಳ ವಿದ್ಯಾರ್ಥಿಗಳು, ಕೈಬರಹ ಸ್ಪರ್ಧೆಯ ವಿಜೇತರು ಹಾಜರಿದ್ದರು.

ಸೋಮವಾರ, ನವೆಂಬರ್ 10, 2025

ತೇಜಸ್ವಿ ಪ್ರತಿಷ್ಠಾನದಿಂದ ಕನ್ನಡ ಕೈಬರಹ ಸ್ಪರ್ಧೆ


ಕೊಟ್ಟಿಗೆಹಾರ:೭೦ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕೊಟ್ಟಿಗೆಹಾರದ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ವತಿಯಿಂದ ತೇಜಸ್ವಿ ಅವರಿಗೊಂದು ಪತ್ರ-ಕನ್ನಡ ಕೈ ಬರಹ ಸ್ಪರ್ಧೆಗೆ ಕೈ ಬರಹವನ್ನು ಆಹ್ವಾನಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಹಾಗೂ ತೇಜಸ್ವಿ ಪ್ರತಿಷ್ಠಾನದ ಸದಸ್ಯ ಕಾರ್ಯದರ್ಶಿಗಳಾದ ಡಾ.ಸಿ.ರಮೇಶ್ ತಿಳಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಕೈ ಬರಹ ಸ್ಪರ್ಧೆಯಲ್ಲಿ ಭಾಗವಹಿಸುವ ಸ್ಫರ್ಧಾರ್ಥಿಗಳು ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರಿಗೆ ಕಾಲ್ಪನಿಕ ಪತ್ರವನ್ನು ತಮ್ಮ ಸ್ವಂತ ಕನ್ನಡ ಕೈ ಬರಹದಲ್ಲಿ ಬರೆಯಬೇಕು. ೧೮ ವರ್ಷದೊಳಗಿನ ಸ್ಪರ್ಧಿಗಳಿಗೆ ಮಾತ್ರ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶವಿದ್ದು ಪತ್ರವನ್ನು ಎ೪ ಸೈಜಿನ ಹಾಳೆಯಲ್ಲಿ ಬರೆಯಬೇಕು. ಕೈ ಬರಹದ ಮೂಲ ಪ್ರತಿಯನ್ನೇ ಕಳುಹಿಸಬೇಕು. ಜೆರಾಕ್ಸ್ ಅಥವಾ ಪ್ರಿಂಟ್ ಪ್ರತಿಗಳನ್ನು ಸ್ವೀಕರಿಸಲಾಗುವುದಿಲ್ಲ . ಪತ್ರದೊಂದಿಗೆ ಪ್ರತ್ಯೇಕ ಹಾಳೆಯಲ್ಲಿ ಸ್ಪರ್ಧಿಗಳ ಪರಿಚಯ, ವಿಳಾಸ, ಮೊಬೈಲ್ ಸಂಖ್ಯೆಯನ್ನು ಬರೆದು ಆಧಾರ್ ಕಾರ್ಡ್ ನಕಲು, ಪಾಸ್ ಪೋರ್ಟ್ ಸೈಜಿನ ಭಾವಚಿತ್ರ ಮತ್ತು ಕೈ ಬರಹ ಸ್ಪರ್ಧಾರ್ಥಿಗಳದ್ದೇ ಎಂಬ ಕುರಿತ ಸ್ವಯಂ ಘೋಷಣಾ ಪತ್ರವನ್ನ ಲಗತ್ತಿಸಬೇಕು ಎಂದು ತಿಳಿಸಿದ್ದಾರೆ.
ಕೈ ಬರಹದ ಪತ್ರವನ್ನು ನವೆಂಬರ್ ೨೦ ರೊಳಗೆ ತಲುಪುವಂತೇ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನ (ರಿ), ಕೊಟ್ಟಿಗೆಹಾರ ಅಂಚೆ, ಮೂಡಿಗೆರೆ ತಾಲ್ಲೂಕು, ಚಿಕ್ಕಮಗಳೂರು ಜಿಲ್ಲೆ-೫೭೭೧೧೩ ಈ ವಿಳಾಸಕ್ಕೆ ಅಂಚೆ ಮೂಲಕ ಅಥವಾ ಖುದ್ದಾಗಿ ತಲುಪಿಸಬಹುದು. ಅತ್ಯುತ್ತಮ ಕೈ ಬರಹ ಮತ್ತು ಅತ್ಯುತ್ತಮ ಪತ್ರ ಎಂಬ ಎರಡು ವಿಭಾಗದಲ್ಲಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನಗಳನ್ನು ಆಯ್ಕೆ ಮಾಡಲಾಗುತ್ತದೆ. ತೀರ್ಪುಗಾರರ ತೀರ್ಮಾನವೇ ಅಂತಿಮವಾಗಿದ್ದು ಪ್ರಥಮ ಬಹುಮಾನ ೫೦೦೦, ದ್ವಿತೀಯ ಬಹುಮಾನ ೩೦೦೦, ತೃತೀಯ ಬಹುಮಾನ ೨೦೦೦ ನಗದು ಹಾಗೂ ಪ್ರಮಾಣ ಪತ್ರವನ್ನು ಒಳಗೊಂಡಿರುತ್ತದೆ. ವಿಜೇತರ ಪಟ್ಟಿಯನ್ನು ನವೆಂಬರ್ ೨೫ ರ ಸಂಜೆ ೫ ಗಂಟೆಗೆ ತೇಜಸ್ವಿ ಪ್ರತಿಷ್ಠಾನದ ಅಧಿಕೃತ ಜಾಲತಾಣ @ಞಠಿಠಿಣಡಿusಣ ನಲ್ಲಿ ಪ್ರಕಟಿಸಲಾಗುವುದು. ಹೆಚ್ಚಿನ ಮಾಹಿತಿಗೆ ೯೬೬೩೦೯೮೮೭೩, ೯೪೪೯೩೦೯೦೬೭ ಗೆ ಸಂರ್ಪಕಿಸಬಹುದು ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.