ಬುಧವಾರ, ಜೂನ್ 25, 2025

ವನ್ ಧನ್ ವಿಕಾಸ ಕೇಂದ್ರದ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಿ


ಬಣಕಲ್:ವನ್ ಧನ್ ವಿಕಾಸ ಕೇಂದ್ರದ ಸೌಲಭ್ಯಗಳ ಸದುಪಯೋಗ ಪಡೆದುಕೊಂಡು ಸ್ವಾವಲಂಭಿ ಬದುಕನ್ನು ಕಟ್ಟಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಎನ್‌ಆರ್‌ಎಲ್‌ಎಂನ ತಾಲ್ಲೂಕು ಕಾರ್ಯಕ್ರಮ ವ್ಯವಸ್ಥಾಪಕರಾದ ಶಾಲಿನಿ ಹೇಳಿದರು.
ಬಣಕಲ್ ಗ್ರಾ.ಪಂ ಸಭಾಂಗಣದಲ್ಲಿ ನಡೆದ ವಿಡಿವಿಕೆ ಮತ್ತು ಎಂಬ್ರಾಯಿಡರಿ ತರಬೇತಿ ಕುರಿತ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.
ಗ್ರಾಮೀಣ ಮಹಿಳೆಯರ ಆರ್ಥಿಕ ಅಭಿವೃದ್ದಿ ಹಾಗೂ ಅರಣ್ಯ ಉತ್ಪನ್ನಗಳ ಮೌಲ್ಯವರ್ಧನೆಗಾಗಿ ಕೇಂದ್ರ ಸರ್ಕಾರದ ದೀನದಯಾಳ್ ಅಂತ್ಯೋದಯ ಯೋಜನೆಯ ರಾಷ್ಟೀಯ ಗ್ರಾಮೀಣ ಜೀವನೋಪಾಯ ಅಭಿಯಾನದ ಅಡಿಯಲ್ಲಿ ವನ್ ಧನ್ ವಿಕಾಸ್ ಕೇಂದ್ರಗಳು ಸ್ಥಾಪನೆಯಾಗಿವೆ. ಈ ಯೋಜನೆಯು ಮಹಿಳಾ ಸ್ವಸಹಾಯ ಗುಂಪುಗಳ ಮೂಲಕ ಪ್ರಾದೇಶಿಕ ಅರಣ್ಯ ಉತ್ಪನ್ನಗಳ ಸಂಗ್ರಹ, ಸಂಸ್ಕರಣೆ, ಪ್ಯಾಕೇಜಿಂಗ್ ಮತ್ತು ಮಾರಾಟಕ್ಕೆ ಅವಕಾಶ ನೀಡುತ್ತದೆ ಎಂದರು.
ಪಿಡಿಓ ಕೃಷ್ಣಪ್ಪ ಮಾತನಾಡಿ ಸರ್ಕಾರದ ಯೋಜನೆಗಳ ಸದುಪಯೋಗ ಪಡೆದುಕೊಂಡು ಮಹಿಳೆಯರು ಆರ್ಥಿಕ ಸ್ವಾವಲಂಬನೆ ಪಡೆದುಕೊಳ್ಳಬಹುದಾಗಿದೆ. ಗ್ರಾಮೀಣ ಭಾಗದ ಮಹಿಳೆಯರು ತಮ್ಮ ಕುಟುಂಬದ ಆದಾಯವನ್ನು ಹೆಚ್ಚಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಸಂಶುನ್ನಿಸ, ಎಫ್‌ಎಲ್‌ಸಿ ಉಮಾ, ಪ್ರಸಾದ್, ದೀಪಿಕಾ, ವಲಯ ಮೇಲ್ವಿಚಾರಕ ನಾಜೀಮ್, ಚೈತ್ರ ಬಣಕಲ್, ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು ಇದ್ದರು.

ಸೋಮವಾರ, ಜೂನ್ 16, 2025

ಗುಂಡಿಗೆ ಬಿದ್ದು ಗಾಯಗೊಂಡಿದ್ದ ಜಿಂಕೆಯ ರಕ್ಷಣೆ

ಉದುಸೆ ಗ್ರಾಮದ ಮನೆಯೊಂದರ ಸಮೀಪ ನಿರ್ಮಾಣ ಹಂತದಲ್ಲಿದ್ದ ಶೌಚಾಲಯದ ಗುಂಡಿಗೆ ಬಿದ್ದು ಗಾಯಗೊಂಡಿದ್ದ ಜಿಂಕೆಯನ್ನು ರಕ್ಷಣೆ ಮಾಡಲಾಯಿತು.
ಉದುಸೆ ಗ್ರಾಮದ ಮನೆಯೊಂದರ ಬಳಿ ನಿರ್ಮಾಣ ಹಂತದಲ್ಲಿದ್ದ ಶೌಚಾಲಯದ ಗುಂಡಿಗೆ ಬಿದ್ದು ಜಿಂಕೆಯೊಂದು ಗಾಯಗೊಂಡಿದ್ದು ಕೂಡಲೇ ಸ್ಥಳೀಯರು ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ವಲಯ ಅರಣ್ಯಾಧಿಕಾರಿ ಕಾವ್ಯ, ಉಪವಲಯ ಅರಣ್ಯಾಧಿಕಾರಿ ರವಿರಾಜ್ ಜಿಂಕೆಯನ್ನು ರಕ್ಷಣೆ ಮಾಡಿದರು. ಬಣಕಲ್ ಪಶು ಆಸ್ಪತ್ರೆಯ ಪಶು ವೈದ್ಯಾಧಿಕಾರಿ ಡಾ.ಪೂಜಾ ಮತ್ತು ಸಹ ಪಶುವೈದ್ಯರಾದ ಡಾ.ಮಸಿಯಣ್ಣ ಗಾಯಗೊಂಡ ಜಿಂಕೆಗೆ ಚಿಕಿತ್ಸೆ ನೀಡಿದರು. ಚೇತರಿಸಿಕೊಂಡ ಜಿಂಕೆಯನ್ನು ಅರಣ್ಯಕ್ಕೆ ಬಿಡಲಾಯಿತು.
 ಈ ಸಂದರ್ಭದಲ್ಲಿ ಅರಣ್ಯ ಕ್ಷೇಮಾಭಿವೃದ್ದಿ ನೌಕರ ಉದಯ್ ಹಾಗೂ ಗ್ರಾ.ಪಂ ಸದಸ್ಯೆ ಇಂದ್ರಮ್ಮ ರಾಜೇಗೌಡ, ಗ್ರಾಮಸ್ಥ ಮಧು ಮುಂತಾದವರು ಇದ್ದರು.

ಮಂಗಳವಾರ, ಜೂನ್ 10, 2025

ತೇಜಸ್ವಿ ಪ್ರತಿಷ್ಠಾನದಲ್ಲಿ ಮೂಡಿಗೆರೆ ಸಿನಿಮಾಹಬ್ಬ

ಕೊಟ್ಟಿಗೆಹಾರ:ಜಾಗತಿಕ ಸಿನಿಮಾಗಳ ವೀಕ್ಷಣೆಯಿಂದ ಅರಿವನ್ನು ವಿಸ್ತರಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಕರ್ನಾಟಕ ಚಲನಚಿತ್ರ ಅಕಾಡೆಮಿ ಸದಸ್ಯ ಐವಾನ್ ಡಿಸಿಲ್ವಾ ಹೇಳಿದರು.

ಮನುಜಮತ ಸಿನಿಯಾನ ಮತ್ತು ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ವತಿಯಿಂದ ಕೊಟ್ಟಿಗೆಹಾರದ ತೇಜಸ್ವಿ ಪ್ರತಿಷ್ಠಾನದಲ್ಲಿ ಎರಡು ದಿನಗಳ ಕಾಲ ನಡೆದ ಮೂಡಿಗೆರೆ ಸಿನಿಮಾಹಬ್ಬದಲ್ಲಿ ಭಾಗವಹಿಸಿ ಮಾತನಾಡಿದರು.
ಮನುಜಮತ ಸಿನಿಯಾನ ೨೦೧೬ ರಲ್ಲಿ ಜಾಗತಿಕ ಸಿನಿಮಾಗಳ ವೀಕ್ಷಣೆ ಮತ್ತು ಸಂವಾದಕ್ಕಾಗಿ ಹುಟ್ಟಿಕೊಂಡ ಸಿನಿಮಾಸಕ್ತರ ತಂಡ. ಪ್ರತಿ ನಾಲ್ಕು ತಿಂಗಳಿಗೊಮ್ಮೆ ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ಸ್ಥಳೀಯ ಸಿನಿಮಾಸಕ್ತರೊಂದಿಗೆ ಸೇರಿಕೊಂಡು ಎರಡು ದಿನಗಳ ನಿರ್ದಿಷ್ಟ ವಿಷಯಾಧಾರಿತ ಸಿನಿಮಾ ಹಬ್ಬಗಳನ್ನು ನಡೆಸಿಕೊಂಡು ಬರಲಾಗುತ್ತಿದೆ. ದೇಶೀಯ, ಅಂತರಾಷ್ಟೀಯ ಸಿನಿಮಾಗಳ ವೀಕ್ಷಣೆ, ಚರ್ಚೆ ಮತ್ತು ಸಂವಾದವನ್ನು ಏರ್ಪಡಿಸುವುದು, ಈ ಮೂಲಕ ಪ್ರಜ್ಞಾವಂತ ಪ್ರಬುದ್ದ ಸಿನಿಮಾ ವೀಕ್ಷಕರನ್ನು ಸೃಷ್ಟಿಸುವುದು ಮನುಜಮತ ಸಿನಿಯಾನದ ಮುಖ್ಯ ಉದ್ದೇಶವಾಗಿದೆ ಎಂದರು.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ಸದಸ್ಯರಾದ ಪ್ರದೀಪ್ ಕೆಂಜಿಗೆ ಮಾತನಾಡಿ, ಸಿನಿಮಾ ಮತ್ತು ನಾಟಕ ಮುಂತಾದ ಚಟುವಟಿಕೆಗಳಿಗೆ ಪೂರಕವಾಗಿರುವ ಸಭಾಂಗಣ ಮತ್ತು ವಸತಿಗೃಹ ನಿರ್ಮಾಣವಾಗುತ್ತಿದ್ದು ಕೆಲ ತಿಂಗಳುಗಳಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ. ಸಿನಿಮಾ ಪ್ರದರ್ಶನ, ನಾಟಕ, ವಿಚಾರ ಸಂಕಿರಣ, ಸಂವಾದ, ಕಾರ್ಯಾಗಾರಗಳು ನಿರಂತರವಾಗಿ ನಡೆಯಲಿದೆ ಎಂದರು.
ವನ್ಯಜೀವಿ ಛಾಯಾಗ್ರಾಹಕ ಡಾ.ಲೋಕೇಶ್ ಮೊಸಳೆ ಅವರಿಂದ ಸಿನಿಮಾದಲ್ಲಿ ಧ್ವನಿ ಬೆಳಕು, ಸಿನಿಮಾಟೋಗ್ರಫಿ ಕುರಿತ ಉಪನ್ಯಾಸ ಮತ್ತು ಪ್ರಾತ್ಯಕ್ಷಿಕೆ ನಡೆಯಿತು. ಅಬ್ಬಾಸ್ ಅಮೀನಿ ನಿರ್ದೇಶನದ ಎಂಡ್ ಲೆಸ್ ಬಾಡರ‍್ಸ್, ಇಂಗ್ಮರ್ ಬರ್ಗ್ ಮೆನ್ ನಿರ್ದೇಶನದ ಶೇಮ್, ಎಲೆಮ್ ಕ್ಲಿಮೋವ್ ನಿರ್ದೇಶನದ ಕಮ್ ಆಂಡ್ ಸೀ ಸಿನಿಮಾ ಹಾಗೂ ಯುವಲ್ ಅವ್ರಹಾಮ್, ಬಾಸೆಲ್ ಅಡ್ರಾ ಮತ್ತು ಹಂದಾನ್ ಬಳ್ಳಾಲ್ ನಿರ್ದೇಶನದ ನೋ ಅದರ್ ಲ್ಯಾಂಡ್ ಸಾಕ್ಷ್ಯಚಿತ್ರ ಪ್ರದರ್ಶನ ನಡೆಯಿತು.
ಕಲಾವಿದ ಮತ್ತು ತೇಜಸ್ವಿ ಒಡನಾಡಿ ಬಾಪು ದಿನೇಶ್ ಮಾತನಾಡಿ, ಅಂತರಾಷ್ಟೀಯ ಸಿನಿಮಾಗಳ ವೀಕ್ಷಣೆಯಿಂದ ಆ ನೆಲದ ಜನಜೀವನ, ಸಂಕಷ್ಟ, ರಾಜಕೀಯದ ಚಿತ್ರಣ ನೋಡುಗರ ಎದೆಗೆ ದಾಟುತ್ತದೆ. ಸಿನಿಮಾ ಪರಿಣಾಮಕಾರಿ ಮಾಧ್ಯಮವಾಗಿದ್ದು ಹೊಸ ನೋಟವನ್ನು ನೀಡುತ್ತದೆ ಎಂದರು.
ಸಭಾ ಕಾರ್ಯಕ್ರಮದಲ್ಲಿ ಕರ್ನಾಟಕ ಚಲನಚಿತ್ರ ಅಕಾಡೆಮಿ ಸದಸ್ಯರಾದ ವಿಷ್ಣುಕುಮಾರ್, ದೇಶಾದ್ರಿ ಹೊಸಮನಿ, ಶಿವಮೊಗ್ಗ ಜಿಲ್ಲಾ ವಾರ್ತಾಧಿಕಾರಿ ಭಾಗ್ಯ ಕೆ.ಟಿ, ಕುವೆಂಪು ಭಾಷಾಪ್ರಾಧಿಕಾರದ ಸದಸ್ಯರಾದ ಭಾರತಿ ದೇವಿ, ಸಾಹಿತಿ ಹಾಗೂ ಸಿನಿಮಾ ಚಿತ್ರಕಥಾಕಾರರಾದ ಶಿಲ್ಪ ಕೆ.ಆರ್, ತೇಜಸ್ವಿ ಪ್ರತಿಷ್ಠಾನದ ಸಂಯೋಜಕ ನಂದೀಶ್ ಬಂಕೇನಹಳ್ಳಿ, ಸಿಬ್ಬಂದಿಗಳಾದ ಸತೀಶ್ ತರುವೆ, ಸಂಗೀತಾ, ಕೀಟ ತಜ್ಞರಾದ ಡಾ.ಅವಿನಾಶ್, ಲೇಖಕ ಪೂರ್ಣೇಶ್ ಮತ್ತಾವರ ಮುಂತಾದವರು ಇದ್ದರು.