ಗುರುವಾರ, ಸೆಪ್ಟೆಂಬರ್ 4, 2025

ಸೆಪ್ಟೆಂಬರ್ ೭ ರಂದು ಚಿಂತನ ಮಂಥನ ಸಭೆ


  ಚಿಕ್ಕಮಗಳೂರು:ಭಗೀರಥ ಶೈಕ್ಷಣಿಕ ಮತ್ತು ಚಾರಿಟಬಲ್ ಟ್ರಸ್ಟ್ ವತಿಯಿಂದ ಸೆಪ್ಟೆಂಬರ್ ೭ ರ ಭಾನುವಾರ ಮೈಸೂರಿನಲ್ಲಿ ಚಿಂತನ ಮಂಥನ ಸಭೆ ನಡೆಯಲಿದೆ ಎಂದು ಭಗೀರಥ ಶೈಕ್ಷಣಿಕ ಮತ್ತು ಚಾರಿಟಬಲ್ ಟ್ರಸ್ಟ್ ನ  ಸದಸ್ಯರಾದ ಬೀರೂರಿನ ಶ್ರೀನಿವಾಸ ಬಿ.ಎನ್ ಮತ್ತು ಕಡೂರಿನ ಲಕ್ಕಪ್ಪ ಅವರು ತಿಳಿಸಿದ್ದಾರೆ.

ಈ ಬಗ್ಗೆ ಜಂಟಿ ಪತ್ರಿಕಾ ಹೇಳಿಕೆ ನೀಡಿ ಮಾತನಾಡಿದ ಅವರು ಸಪ್ಟೆಂಬರ್ ೭ ರಂದು ಮೈಸೂರಿನ ಸರಸ್ವತಿಪುರಂನಲ್ಲಿರುವ ಉಪ್ಪಾರ ವಿದ್ಯಾರ್ಥಿ ನಿಲಯದಲ್ಲಿ ಟ್ರಸ್ಟಿನ ಆಡಳಿತ ಮಂಡಳಿ ಸಭೆ  ಮತ್ತು ಉಪ್ಪಾರ ಸಮಾಜದ ಬಂಧುಗಳೊAದಿಗೆ ಚಿಂತನ ಮಂಥನ ಸಭೆ ನಡೆಯಲಿದೆ. ಮ್ಯಾನೇಜಿಂಗ್ ಟ್ರಸ್ಟಿಗಳಾದ ಪಿ.ಶಿವಶಂಕರ್ ಅವರ ಅಧ್ಯಕ್ಷತೆಯಲ್ಲಿ ಬೆಳಿಗ್ಗೆ ೧೧ ಗಂಟೆಗೆ ಚಿಂತನಾ ಮಂಥನ ಸಭೆ ನಡೆಯಲಿದ್ದು ಮಧ್ಯಾಹ್ನ  ೨ ಗಂಟೆಗೆ ಟ್ರಸ್ಟಿನ ಸರ್ವ ಸದಸ್ಯರ ಸಭೆ ನಡೆಯಲಿದೆ. ಈ ಸಭೆಗೆ ಸಮಾಜ ಭಾಂದವರು ಭಾಗವಹಿಸಿ ಸಮಾಜದ ಏಳಿಗೆಯ ಕುರಿತ ಚಿಂತನ ಮಂಥನ ಸಭೆಯಲ್ಲಿ ಭಾಗವಹಿಸಬೇಕು ಎಂದು ತಿಳಿಸಿದ್ದಾರೆ.
ಭಗೀರಥ ಶೈಕ್ಷಣಿಕ ಮತ್ತು ಚಾರಿಟಬಲ್ ಟ್ರಸ್ಟ್  ಉಪ್ಪಾರ ಸಮಾಜದ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಮತ್ತು ಔದ್ಯೋಗಿಕ ಏಳಿಗೆಗೆ ಕಂಕಣಬದ್ದವಾಗಿದ್ದು ಸಮಾಜದ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವನ್ನು ನೀಡುತ್ತಾ ಬಂದಿದೆ. ೨೦೨೪-೨೫ನೇ ಸಾಲಿನಲ್ಲಿ ವೈದ್ಯಕೀಯ, ಇಂಜಿನಿಯರಿಂಗ, ಆರ್ಯುವೇದಿಕ್, ಕೃಷಿ, ತೋಟಗಾರಿಕೆ, ಭಿ ಫಾರ್ಮಾ, ಪ್ಯಾರಾಮೆಡಿಕಲ್, ಬಿ ಎಡ್, ಕಾನೂನು, ಸ್ನಾತಕೋತರ ಕೋರ್ಸ್ಗಳನ್ನು ವ್ಯಾಸಂಗ ಮಾಡುತ್ತಿರುವ ರಾಜ್ಯದ ೪ ವಿವಿಧ ಜಿಲ್ಲೆಗಳಿಗೆ ಸೇರಿದ ೧೨೮ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಸುಮಾರು ಇಪ್ಪತ್ಮೂರು ಲಕ್ಷ ಆರ್ಥಿಕ ನೆರವನ್ನು ನೀಡಲಾಗಿದೆ. ಸಮಾಜ ಭಾಂದವರ ಸರ್ವಾಂಗೀಣ ಅಭಿವೃದ್ದಿಗೆ ಪೂರಕವಾಗಿ ಸೆಪ್ಟೆಂಬರ್ ೭ ರಂದು ನಡೆಯುವ ಸಭೆಯ ಕುರಿತ ಹೆಚ್ಚಿನ ಮಾಹಿತಿಗೆ ೯೮೪೪೫೯೦೬೨೪/೯೯೬೪೧೨೫೩೪೧ ಗೆ ಸಂರ್ಪಕಿಸಬಹುದು ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಶುಕ್ರವಾರ, ಆಗಸ್ಟ್ 15, 2025

ಶ್ರಮಜೀವಿ ಆಟೋ ಮಾಲೀಕರು ಮತ್ತು ಚಾಲಕರ ಸಂಘದಿಂದ ಸ್ವಾತಂತ್ರ್ಯ ದಿನಾಚರಣೆ


ಕೊಟ್ಟಿಗೆಹಾರ:ಸ್ವಾತಂತ್ರ್ಯ ತಂದು ಕೊಡಲು ಶ್ರಮಿಸಿದ ಸಾವಿರಾರು ಹೋರಾಟಗಾರರ ತ್ಯಾಗ ಬಲಿದಾನವನ್ನು ಸ್ಮರಿಸಬೇಕಿದೆ ಎಂದು ಬಣಕಲ್ ಪ್ರೌಢಶಾಲೆಯ ಮುಖ್ಯಶಿಕ್ಷಕ ಶ್ರೀನಿವಾಸ್ ಹೇಳಿದರು.
ಬಣಕಲ್‌ನ ಶ್ರಮಜೀವಿ ಆಟೋ ಚಾಲಕರು ಮತ್ತು ಮಾಲೀಕರ ಸಂಘದ ವತಿಯಿಂದ ನಡೆದ ಸ್ವಾತಂತ್ರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ನಿಜ ಅರ್ಥದಲ್ಲಿ ಪೂರ್ಣ ಸ್ವಾತಂತ್ರ ಇನ್ನೂ ಸಿಕ್ಕಿಲ್ಲ. ಎಲ್ಲರಿಗೂ ಸಮನಾಗಿ ಸ್ವಾತಂತ್ರ್ಯವೂ ಸಿಗುವಂತಾಗಬೇಕಿದೆ. ರಾಷ್ಟ್ರೀಯ ಹಬ್ಬಗಳ ಆಚರಣೆ ಮಕ್ಕಳು ಸೇರಿದಂತೇ ಎಲ್ಲರಲ್ಲೂ ದೇಶಾಭಿಮಾನವನ್ನು ಹೆಚ್ಚಿಸಲು ವೇದಿಕೆಯಾಗಿದೆ ಎಂದರು.
ದಾನಿಗಳಾದ ಬಿ.ಎನ್.ದಿವ್ಯಪ್ರಸಾದ್ ಧ್ವಜರೋಹಣ ನೆರವೇರಿಸಿದರು. 
ಸಾಧಕರಾದ ಹಿಲಾರಿ ಜೋಸೆಫ್, ನಂದೀಶ್ ಬಂಕೇನಹಳ್ಳಿ, ಸೂರಿ ಬಣಕಲ್, ಮಾನವಿ ಬಗ್ಗಸಗೋಡು, ಶೇಖರ್ ಸಬ್ಲಿ ಮತ್ತು ದಾನಿಗಳಾದ ಬಿ.ಎನ್.ದೀಪಕ್, ಬಿ.ಎನ್.ದಿವ್ಯಪ್ರಸಾದ್ ಅವರನ್ನು ಸನ್ಮಾನಿಸಲಾಯಿತು.
ಸ್ವಾತಂತ್ರ ದಿನಾಚರಣೆ ಅಂಗವಾಗಿ ಆಟೋಗಳನ್ನು ಆಕರ್ಷಕವಾಗಿ ಸಿಂಗರಿಸಲಾಯಿತು. ಬಣಕಲ್ ಪ್ರೌಢಶಾಲೆ ಮತ್ತು ರಿವರ್ ವ್ಯೂವ್ ಶಾಲೆಯ ವಿದ್ಯಾರ್ಥಿಗಳು ಬಣಕಲ್ ಮುಖ್ಯ ರಸ್ತೆಯಲ್ಲಿ ಮೆರವಣ ಗೆ ನಡೆಸಿದರು. 
ಈ ಸಂದರ್ಭದಲ್ಲಿ ಶ್ರಮಜೀವಿ ಆಟೋ ಚಾಲಕರ ಮತ್ತು ಮಾಲೀಕರ ಸಂಘದ ಅಧ್ಯಕ್ಷ ಸುರೇಶ್, ಗೌರವ ಅಧ್ಯಕ್ಷರಾದ ಸಬ್ಲಿ ದೇವರಾಜ್ ಹಾಗೂ ಪದಾಧಿಕಾರಿಗಳು ಇದ್ದರು.
ವಿವಿಧೆಡೆ ಸಂಭ್ರಮದ ಸ್ವಾತಂತ್ರ ದಿನಾಚರಣೆ: ಬಣಕಲ್‌ನಲ್ಲಿ ವಿವಿದೆಡೆ ಸ್ವಾತಂತ್ರ ದಿನಾಚರಣೆಯನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಧ್ವಜಾರೋಹಣವನ್ನು ಬಣಕಲ್ ಗ್ರಾ.ಪಂಯಲ್ಲಿ ಅಧ್ಯಕ್ಷರಾದ ಜರೀನಾ, ವಿದ್ಯಾಭಾರತಿ ಶಾಲೆಯಲ್ಲಿ ಸವಿತಾ ಸಮಾಜದ ಅಧ್ಯಕ್ಷ ಹರೀಶ್ ಫಲ್ಗುಣ , ಬಣಕಲ್ ಪ್ರೌಢಶಾಲೆಯಲ್ಲಿ ಕೋಶಾಧಿಕಾರಿ ಬಿ.ಕೆ.ಪೃಥ್ವಿ, ನಜರೆತ್ ಶಾಲೆಯಲ್ಲಿ ಪೋಷಕರಾದ ಭವ್ಯಾಭಟ್ ನೆರವೇರಿಸಿದರು.

ಬುಧವಾರ, ಆಗಸ್ಟ್ 6, 2025

ಶಾಸಕರ ತೇಜೋವಧೆ ಸರಿಯಲ್ಲ:ಸಬ್ಲಿ ದೇವರಾಜ್

 ಬಣಕಲ್:ಮೂಡಿಗೆರೆ ಶಾಸಕರಾದ ನಯನ ಮೋಟಮ್ಮ ಅವರು ತಾಲ್ಲೂಕು ಗಣೇಶೋತ್ಸವ ಸಮಿತಿ ಲೋಗೋ ಮತ್ತು ಭಗವಾಧ್ವಜ ಸ್ತಂಭ ಸ್ಥಾಪನಾ ಕಾರ್ಯಕ್ರಮದಲ್ಲಿ ಕೇಸರಿ ಬಣ್ಣದ ಶಾಲು ಧರಿಸಿದ ಕಾರಣ ಶಾಸಕರನ್ನು ತೇಜೋವಧೆ ಮಾಡುವುದು ಸರಿಯಲ್ಲ ಎಂದು ತಾ.ಪಂ ಮಾಜಿ ಸದಸ್ಯರಾದ ಸಬ್ಲಿ ದೇವರಾಜು ಹೇಳಿದರು.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಶಾಸಕರಾಗಿ ಅವರು ತಮ್ಮ ಜವಾಬ್ದಾರಿಯನ್ನು ನಿಭಾಯಿಸಿದ್ದಾರೆ. ಶಾಸಕರಾದ ಮೇಲೆ ಒಂದು ಜಾತಿಗೆ, ಧರ್ಮಕ್ಕೆ ಹೇಗೆ ಸೀಮಿತರಾಗಲು ಸಾಧ್ಯ?. ಯಾವುದೇ ಧರ್ಮದ ಕಾರ್ಯಕ್ರಮದಲ್ಲ್ಲಿ ಆ ಧರ್ಮದ ಆಚರಣೆಯಂತೆಯೇ ಭಾಗವಹಿಸಬೇಕು ಅದು ಆ ಧರ್ಮಕ್ಕೆ ಕೊಡುವ ಗೌರವ. ಶಾಸಕರು ಮೊದಲಿನಿಂದಲೂ ದೇವರ ಮೇಲೆ ಅಪಾರ ಭಕ್ತಿ ಭಾವ ಹೊಂದಿರುವ ವ್ಯಕ್ತಿ. ಒಬ್ಬ ಶಾಸಕ ಹಿಂದೂ ಆಗಿರಲಿ, ಮುಸ್ಲಿಂ ಅಥವಾ ಕ್ರೈಸ್ತ ಅಥವಾ ಇನ್ನಾವುದೇ ಧರ್ಮದವರಾಗಿರಲಿ. ಇತರೆ ಧರ್ಮದ ಪೂಜೆ ಪುರಸ್ಕಾರ ಹಬ್ಬ ಹರಿದಿನಗಳಿಗೆ ಅವರ ಸಂಪ್ರದಾಯದಂತೆ ಭಾಗವಹಿಸಬೇಕು. ಅದು ಅಲ್ಲದೆ ಗಣೇಶ ಚತುರ್ಥಿ ಎಂಬುದು ಧರ್ಮ ಜಾತಿ ಮೀರಿ ನಡೆಯುವ ಹಬ್ಬವಾಗಿದೆ ಎಂದರು.
ಕೇಸರಿ ಬಣ್ಣದ ಶಾಲು ಯಾವುದೇ ಒಂದು ಸಂಘಟನೆಯ ಸ್ವತ್ತಲ್ಲ. ಮನೆಯ ಅಥವಾ ದೇವಸ್ಥಾನದ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಎಲ್ಲರೂ ಕೇಸರಿ ಶಾಲನ್ನು ಧರಿಸುತ್ತಾರೆ. ಅದು ಸಹಜವೂ ಕೂಡ. ಅದರಲ್ಲಿ ತಪ್ಪು ಹುಡುಕುವ ಅಗತ್ಯವಿಲ್ಲ. ಒಬ್ಬ ಶಾಸಕರಿಂದ  ಜನರಿಗೆ ಸ್ಪಂದನೆ, ಸೌಲಭ್ಯ, ಅನ್ಯ ಜಾತಿ, ಧರ್ಮಗಳೊಂದಿಗೆ ಸೌಹಾರ್ದತೆ ಇದೆಯೇ ಎಂಬುದನ್ನು ಗಮನಿಸಬೇಕೇ ಹೊರತು ಈ ರೀತಿಯ ವಿಷಯಗಳನಲ್ಲ. ಶಾಸಕರು ತಾಲ್ಲೂಕು ಗಣೇಶೋತ್ಸವ ಸಮಿತಿಯ ಕಾರ್ಯಕ್ರಮದ ವೇದಿಕೆಯಲ್ಲಿ ಯಾವ ಧರ್ಮದ ಬಗ್ಗೆಯೂ ಕೂಡ ಅವಹೇಳನಕಾರಿಯಾಗಿ ಮಾತನಾಡಿಲ್ಲ. ಹೀಗಿರುವಾಗ ಈ ವಿಚಾರದಲ್ಲಿ ತಪ್ಪು ಹುಡುಕುವುದರಲ್ಲಿ ಅರ್ಥವಿಲ್ಲ ಎಂದು ತಿಳಿಸಿದ್ದಾರೆ.

ಬುಧವಾರ, ಜೂನ್ 25, 2025

ವನ್ ಧನ್ ವಿಕಾಸ ಕೇಂದ್ರದ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಿ


ಬಣಕಲ್:ವನ್ ಧನ್ ವಿಕಾಸ ಕೇಂದ್ರದ ಸೌಲಭ್ಯಗಳ ಸದುಪಯೋಗ ಪಡೆದುಕೊಂಡು ಸ್ವಾವಲಂಭಿ ಬದುಕನ್ನು ಕಟ್ಟಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಎನ್‌ಆರ್‌ಎಲ್‌ಎಂನ ತಾಲ್ಲೂಕು ಕಾರ್ಯಕ್ರಮ ವ್ಯವಸ್ಥಾಪಕರಾದ ಶಾಲಿನಿ ಹೇಳಿದರು.
ಬಣಕಲ್ ಗ್ರಾ.ಪಂ ಸಭಾಂಗಣದಲ್ಲಿ ನಡೆದ ವಿಡಿವಿಕೆ ಮತ್ತು ಎಂಬ್ರಾಯಿಡರಿ ತರಬೇತಿ ಕುರಿತ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.
ಗ್ರಾಮೀಣ ಮಹಿಳೆಯರ ಆರ್ಥಿಕ ಅಭಿವೃದ್ದಿ ಹಾಗೂ ಅರಣ್ಯ ಉತ್ಪನ್ನಗಳ ಮೌಲ್ಯವರ್ಧನೆಗಾಗಿ ಕೇಂದ್ರ ಸರ್ಕಾರದ ದೀನದಯಾಳ್ ಅಂತ್ಯೋದಯ ಯೋಜನೆಯ ರಾಷ್ಟೀಯ ಗ್ರಾಮೀಣ ಜೀವನೋಪಾಯ ಅಭಿಯಾನದ ಅಡಿಯಲ್ಲಿ ವನ್ ಧನ್ ವಿಕಾಸ್ ಕೇಂದ್ರಗಳು ಸ್ಥಾಪನೆಯಾಗಿವೆ. ಈ ಯೋಜನೆಯು ಮಹಿಳಾ ಸ್ವಸಹಾಯ ಗುಂಪುಗಳ ಮೂಲಕ ಪ್ರಾದೇಶಿಕ ಅರಣ್ಯ ಉತ್ಪನ್ನಗಳ ಸಂಗ್ರಹ, ಸಂಸ್ಕರಣೆ, ಪ್ಯಾಕೇಜಿಂಗ್ ಮತ್ತು ಮಾರಾಟಕ್ಕೆ ಅವಕಾಶ ನೀಡುತ್ತದೆ ಎಂದರು.
ಪಿಡಿಓ ಕೃಷ್ಣಪ್ಪ ಮಾತನಾಡಿ ಸರ್ಕಾರದ ಯೋಜನೆಗಳ ಸದುಪಯೋಗ ಪಡೆದುಕೊಂಡು ಮಹಿಳೆಯರು ಆರ್ಥಿಕ ಸ್ವಾವಲಂಬನೆ ಪಡೆದುಕೊಳ್ಳಬಹುದಾಗಿದೆ. ಗ್ರಾಮೀಣ ಭಾಗದ ಮಹಿಳೆಯರು ತಮ್ಮ ಕುಟುಂಬದ ಆದಾಯವನ್ನು ಹೆಚ್ಚಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಸಂಶುನ್ನಿಸ, ಎಫ್‌ಎಲ್‌ಸಿ ಉಮಾ, ಪ್ರಸಾದ್, ದೀಪಿಕಾ, ವಲಯ ಮೇಲ್ವಿಚಾರಕ ನಾಜೀಮ್, ಚೈತ್ರ ಬಣಕಲ್, ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು ಇದ್ದರು.

ಸೋಮವಾರ, ಜೂನ್ 16, 2025

ಗುಂಡಿಗೆ ಬಿದ್ದು ಗಾಯಗೊಂಡಿದ್ದ ಜಿಂಕೆಯ ರಕ್ಷಣೆ

ಉದುಸೆ ಗ್ರಾಮದ ಮನೆಯೊಂದರ ಸಮೀಪ ನಿರ್ಮಾಣ ಹಂತದಲ್ಲಿದ್ದ ಶೌಚಾಲಯದ ಗುಂಡಿಗೆ ಬಿದ್ದು ಗಾಯಗೊಂಡಿದ್ದ ಜಿಂಕೆಯನ್ನು ರಕ್ಷಣೆ ಮಾಡಲಾಯಿತು.
ಉದುಸೆ ಗ್ರಾಮದ ಮನೆಯೊಂದರ ಬಳಿ ನಿರ್ಮಾಣ ಹಂತದಲ್ಲಿದ್ದ ಶೌಚಾಲಯದ ಗುಂಡಿಗೆ ಬಿದ್ದು ಜಿಂಕೆಯೊಂದು ಗಾಯಗೊಂಡಿದ್ದು ಕೂಡಲೇ ಸ್ಥಳೀಯರು ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ವಲಯ ಅರಣ್ಯಾಧಿಕಾರಿ ಕಾವ್ಯ, ಉಪವಲಯ ಅರಣ್ಯಾಧಿಕಾರಿ ರವಿರಾಜ್ ಜಿಂಕೆಯನ್ನು ರಕ್ಷಣೆ ಮಾಡಿದರು. ಬಣಕಲ್ ಪಶು ಆಸ್ಪತ್ರೆಯ ಪಶು ವೈದ್ಯಾಧಿಕಾರಿ ಡಾ.ಪೂಜಾ ಮತ್ತು ಸಹ ಪಶುವೈದ್ಯರಾದ ಡಾ.ಮಸಿಯಣ್ಣ ಗಾಯಗೊಂಡ ಜಿಂಕೆಗೆ ಚಿಕಿತ್ಸೆ ನೀಡಿದರು. ಚೇತರಿಸಿಕೊಂಡ ಜಿಂಕೆಯನ್ನು ಅರಣ್ಯಕ್ಕೆ ಬಿಡಲಾಯಿತು.
 ಈ ಸಂದರ್ಭದಲ್ಲಿ ಅರಣ್ಯ ಕ್ಷೇಮಾಭಿವೃದ್ದಿ ನೌಕರ ಉದಯ್ ಹಾಗೂ ಗ್ರಾ.ಪಂ ಸದಸ್ಯೆ ಇಂದ್ರಮ್ಮ ರಾಜೇಗೌಡ, ಗ್ರಾಮಸ್ಥ ಮಧು ಮುಂತಾದವರು ಇದ್ದರು.

ಮಂಗಳವಾರ, ಜೂನ್ 10, 2025

ತೇಜಸ್ವಿ ಪ್ರತಿಷ್ಠಾನದಲ್ಲಿ ಮೂಡಿಗೆರೆ ಸಿನಿಮಾಹಬ್ಬ

ಕೊಟ್ಟಿಗೆಹಾರ:ಜಾಗತಿಕ ಸಿನಿಮಾಗಳ ವೀಕ್ಷಣೆಯಿಂದ ಅರಿವನ್ನು ವಿಸ್ತರಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಕರ್ನಾಟಕ ಚಲನಚಿತ್ರ ಅಕಾಡೆಮಿ ಸದಸ್ಯ ಐವಾನ್ ಡಿಸಿಲ್ವಾ ಹೇಳಿದರು.

ಮನುಜಮತ ಸಿನಿಯಾನ ಮತ್ತು ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ವತಿಯಿಂದ ಕೊಟ್ಟಿಗೆಹಾರದ ತೇಜಸ್ವಿ ಪ್ರತಿಷ್ಠಾನದಲ್ಲಿ ಎರಡು ದಿನಗಳ ಕಾಲ ನಡೆದ ಮೂಡಿಗೆರೆ ಸಿನಿಮಾಹಬ್ಬದಲ್ಲಿ ಭಾಗವಹಿಸಿ ಮಾತನಾಡಿದರು.
ಮನುಜಮತ ಸಿನಿಯಾನ ೨೦೧೬ ರಲ್ಲಿ ಜಾಗತಿಕ ಸಿನಿಮಾಗಳ ವೀಕ್ಷಣೆ ಮತ್ತು ಸಂವಾದಕ್ಕಾಗಿ ಹುಟ್ಟಿಕೊಂಡ ಸಿನಿಮಾಸಕ್ತರ ತಂಡ. ಪ್ರತಿ ನಾಲ್ಕು ತಿಂಗಳಿಗೊಮ್ಮೆ ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ಸ್ಥಳೀಯ ಸಿನಿಮಾಸಕ್ತರೊಂದಿಗೆ ಸೇರಿಕೊಂಡು ಎರಡು ದಿನಗಳ ನಿರ್ದಿಷ್ಟ ವಿಷಯಾಧಾರಿತ ಸಿನಿಮಾ ಹಬ್ಬಗಳನ್ನು ನಡೆಸಿಕೊಂಡು ಬರಲಾಗುತ್ತಿದೆ. ದೇಶೀಯ, ಅಂತರಾಷ್ಟೀಯ ಸಿನಿಮಾಗಳ ವೀಕ್ಷಣೆ, ಚರ್ಚೆ ಮತ್ತು ಸಂವಾದವನ್ನು ಏರ್ಪಡಿಸುವುದು, ಈ ಮೂಲಕ ಪ್ರಜ್ಞಾವಂತ ಪ್ರಬುದ್ದ ಸಿನಿಮಾ ವೀಕ್ಷಕರನ್ನು ಸೃಷ್ಟಿಸುವುದು ಮನುಜಮತ ಸಿನಿಯಾನದ ಮುಖ್ಯ ಉದ್ದೇಶವಾಗಿದೆ ಎಂದರು.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ಸದಸ್ಯರಾದ ಪ್ರದೀಪ್ ಕೆಂಜಿಗೆ ಮಾತನಾಡಿ, ಸಿನಿಮಾ ಮತ್ತು ನಾಟಕ ಮುಂತಾದ ಚಟುವಟಿಕೆಗಳಿಗೆ ಪೂರಕವಾಗಿರುವ ಸಭಾಂಗಣ ಮತ್ತು ವಸತಿಗೃಹ ನಿರ್ಮಾಣವಾಗುತ್ತಿದ್ದು ಕೆಲ ತಿಂಗಳುಗಳಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ. ಸಿನಿಮಾ ಪ್ರದರ್ಶನ, ನಾಟಕ, ವಿಚಾರ ಸಂಕಿರಣ, ಸಂವಾದ, ಕಾರ್ಯಾಗಾರಗಳು ನಿರಂತರವಾಗಿ ನಡೆಯಲಿದೆ ಎಂದರು.
ವನ್ಯಜೀವಿ ಛಾಯಾಗ್ರಾಹಕ ಡಾ.ಲೋಕೇಶ್ ಮೊಸಳೆ ಅವರಿಂದ ಸಿನಿಮಾದಲ್ಲಿ ಧ್ವನಿ ಬೆಳಕು, ಸಿನಿಮಾಟೋಗ್ರಫಿ ಕುರಿತ ಉಪನ್ಯಾಸ ಮತ್ತು ಪ್ರಾತ್ಯಕ್ಷಿಕೆ ನಡೆಯಿತು. ಅಬ್ಬಾಸ್ ಅಮೀನಿ ನಿರ್ದೇಶನದ ಎಂಡ್ ಲೆಸ್ ಬಾಡರ‍್ಸ್, ಇಂಗ್ಮರ್ ಬರ್ಗ್ ಮೆನ್ ನಿರ್ದೇಶನದ ಶೇಮ್, ಎಲೆಮ್ ಕ್ಲಿಮೋವ್ ನಿರ್ದೇಶನದ ಕಮ್ ಆಂಡ್ ಸೀ ಸಿನಿಮಾ ಹಾಗೂ ಯುವಲ್ ಅವ್ರಹಾಮ್, ಬಾಸೆಲ್ ಅಡ್ರಾ ಮತ್ತು ಹಂದಾನ್ ಬಳ್ಳಾಲ್ ನಿರ್ದೇಶನದ ನೋ ಅದರ್ ಲ್ಯಾಂಡ್ ಸಾಕ್ಷ್ಯಚಿತ್ರ ಪ್ರದರ್ಶನ ನಡೆಯಿತು.
ಕಲಾವಿದ ಮತ್ತು ತೇಜಸ್ವಿ ಒಡನಾಡಿ ಬಾಪು ದಿನೇಶ್ ಮಾತನಾಡಿ, ಅಂತರಾಷ್ಟೀಯ ಸಿನಿಮಾಗಳ ವೀಕ್ಷಣೆಯಿಂದ ಆ ನೆಲದ ಜನಜೀವನ, ಸಂಕಷ್ಟ, ರಾಜಕೀಯದ ಚಿತ್ರಣ ನೋಡುಗರ ಎದೆಗೆ ದಾಟುತ್ತದೆ. ಸಿನಿಮಾ ಪರಿಣಾಮಕಾರಿ ಮಾಧ್ಯಮವಾಗಿದ್ದು ಹೊಸ ನೋಟವನ್ನು ನೀಡುತ್ತದೆ ಎಂದರು.
ಸಭಾ ಕಾರ್ಯಕ್ರಮದಲ್ಲಿ ಕರ್ನಾಟಕ ಚಲನಚಿತ್ರ ಅಕಾಡೆಮಿ ಸದಸ್ಯರಾದ ವಿಷ್ಣುಕುಮಾರ್, ದೇಶಾದ್ರಿ ಹೊಸಮನಿ, ಶಿವಮೊಗ್ಗ ಜಿಲ್ಲಾ ವಾರ್ತಾಧಿಕಾರಿ ಭಾಗ್ಯ ಕೆ.ಟಿ, ಕುವೆಂಪು ಭಾಷಾಪ್ರಾಧಿಕಾರದ ಸದಸ್ಯರಾದ ಭಾರತಿ ದೇವಿ, ಸಾಹಿತಿ ಹಾಗೂ ಸಿನಿಮಾ ಚಿತ್ರಕಥಾಕಾರರಾದ ಶಿಲ್ಪ ಕೆ.ಆರ್, ತೇಜಸ್ವಿ ಪ್ರತಿಷ್ಠಾನದ ಸಂಯೋಜಕ ನಂದೀಶ್ ಬಂಕೇನಹಳ್ಳಿ, ಸಿಬ್ಬಂದಿಗಳಾದ ಸತೀಶ್ ತರುವೆ, ಸಂಗೀತಾ, ಕೀಟ ತಜ್ಞರಾದ ಡಾ.ಅವಿನಾಶ್, ಲೇಖಕ ಪೂರ್ಣೇಶ್ ಮತ್ತಾವರ ಮುಂತಾದವರು ಇದ್ದರು.

ಮಂಗಳವಾರ, ಏಪ್ರಿಲ್ 22, 2025

ಬಣಕಲ್ ಸುತ್ತಮುತ್ತ ಭಾರಿ ಗಾಳಿ‌ ಮಳೆ:ಹಾರಿ ಹೋದ ಬಣಕಲ್ ವಿಧ್ಯಾಭಾರತಿ ಶಾಲೆಯ ಮೇಲ್ಛಾವಣಿ

 ಬಣಕಲ್:ಬಣಕಲ್ ಸುತ್ತಮುತ್ತ ಸೋಮವಾರ ರಾತ್ರಿ ಗಾಳಿ ಸಹಿತ ಭಾರಿ ಮಳೆಯಾಗಿದ್ದು ಮಳೆಯಿಂದಾಗಿ ಬಣಕಲ್ ಶ್ರೀವಿದ್ಯಾಭಾರತಿ ಶಾಲೆಯ ಕಬ್ಬಿಣದ ಮೇಲ್ಛಾವಣಿ ಹಾರಿ ಹೋಗಿದೆ.
 ಗಾಳಿ ಮಳೆಯ ತೀವ್ರತೆಯಿಂದಾಗಿ ಮೇಲ್ಛಾವಣಿಯ ಕಬ್ಬಿಣದ ಕಂಬಿಗಳು ಬಾಗಿದ್ದು ಗೋಡೆಗಳು ಬಿರುಕು ಬಿಟ್ಟಿದ್ದೆ. ಅಧೃಷ್ಟವಶಾತ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಸ್ಥಳಕ್ಕೆ ಶಾಲಾ ಸಮಿತಿಯ ಪದಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು
. ಈ ಸಂದರ್ಭದಲ್ಲಿಮಾತನಾಡಿದ ಶಾಲಾ ಸಮಿತಿಯ ಅಧ್ಯಕ್ಷರಾದ ಶಿವರಾಮ ಶೆಟ್ಟಿ ಮಾತನಾಡಿ, ಸಂಸದರ ಅನುದಾನದಲ್ಲಿ ನಿರ್ಮಿಸಲಾಗಿದ್ದ ಮೇಲ್ಛಾವಣಿ  ಗಾಳಿ ಮಳೆಯಿಂದ  ಹಾರಿ ಹೋಗಿ ಸುಮಾರು 4 ಲಕ್ಷ ನಷ್ಟ ಸಂಭವಿಸಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳು ಮತ್ತು ತಹಶೀಲ್ದಾರ್ ಅವರಿಗೂ ದುರಸ್ತಿ ಮಾಡಿ ಕೊಡುವಂತೇ ಮನವಿ ಮಾಡಲಾಗಿದೆ. ಶಾಲೆಗೆ ರಜೆ ಇದ್ದುದ್ದರಿಂದ ಮತ್ತು ರಾತ್ರಿ ಸಮಯದಲ್ಲಿ ಈ ಘಟನೆ ನಡೆದಿದ್ದುರಿಂದ ಯಾವುದೇ ಅನಾಹುತ ಸಂಭವಿಸಿಲ್ಲ.
 ಬಣಕಲ್ ನ ಶ್ರೀವಿದ್ಯಾಭಾರತಿ ಶಾಲೆಯೂ ಹಲವು ವರ್ಷಗಳಿಂದ ಶೇ 100 ಫಲಿತಾಂಶವನ್ನು ಪಡೆದುಕೊಂಡು ಬರುತ್ತಿದೆ. ಶಾಲೆಗೆ ಬರುವ ರಸ್ತೆಯೂ ಸಂಪೂರ್ಣ ಹಾಳಾಗಿದೆ. ಇದೀಗ ಶಾಲಾ ಕಟ್ಟಡದ ಮೇಲ್ಚಾವಣಿಯೂ ಹಾನಿಯಾಗಿದ್ದು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ನೆರವಿಗೆ ಬರಬೇಕಿದೆ. ಎಂದರು.
ಈ ಸಂದರ್ಭದಲ್ಲಿ ಶಾಲಾ ಸಮಿತಿಯ ಲಿಂಗಪ್ಪ ಹಾಗೂ ಶಿಕ್ಷಕರು ಇದ್ದರು‌.